ಮನೆಗೆ ನುಗ್ಗಿದ ಕಳ್ಳರು ಬ್ಲೇಡ್ ನಿಂದ ಮಹಿಳೆಯ ಕುತ್ತಿಗೆ ಕೊಯ್ದು ಚಿನ್ನಾಭರಣ, ನಗದು ಕದ್ದು ಪರಾರಿ
Views: 90
ಕನ್ನಡ ಕರಾವಳಿ ಸುದ್ದಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು ಬ್ಲೇಡ್ನಿಂದ ದಾಳಿ ಮಾಡಿ ಕೊರಳಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಅಮೀರ್ ಬಿ. ಪಟೇಲ್ ದುಷ್ಕರ್ಮಿಗಳ ದಾಳಿಗೆ ಒಳಗಾದ ಮಹಿಳೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀರ್ ಬಿ ಪಟೇಲ್ ಅವರ ಮಗ ಹೈದರಾಬಾದ್ನಲ್ಲಿ ಕೆಲಸ ಮಾಡುವ ಹಿನ್ನೆಲೆ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಬ್ಲೇಡ್ನಿಂದ ಕುತ್ತಿಗೆ ಕೊಯ್ದು ಮೈಮೇಲಿದ್ದ ಸುಮಾರು 60 ಗ್ರಾಂ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ಸುಮಾರು 1 ಲಕ್ಷ ರೂ. ಗೂ ಅಧಿಕ ನಗದು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಜೇವರ್ಗಿ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಸುಳಿವಿಗಾಗಿ ತನಿಖೆ ಮುಂದುವರೆದಿದೆ.






