ಪತ್ನಿ ಜತೆಗೆ ಅನೈತಿಕ ಸಂಬಂಧ:ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಅಣ್ಣ
Views: 185
ಕನ್ನಡ ಕರಾವಳಿ ಸುದ್ದಿ : ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಅಣ್ಣನೊಬ್ಬ ತನ್ನ ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು ಗ್ರಾಮದ ರಾಮಚಂದ್ರ (30) ಕೊಲೆಯಾದ ವ್ಯಕ್ತಿ.
ಪುತ್ರ ರಾಮಚಂದ್ರ ಕಳೆದ ಸೆಪ್ಟೆಂಬರ್ 8 ರಂದು ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಕೆಲವು ದಿನಗಳ ನಂತರ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಕರಣದಲ್ಲಿ ಕಾಣೆಯಾದವನ ಪತ್ತೆಯಾಗಿರಲಿಲ್ಲ. ಆದಾಗ್ಯೂ ಅನುಮಾನ ಬಲವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯ ಜಾಡು ಬದಲಿಸಿದ್ದರು. ಅಲ್ಲದೆ, ಪ್ರಕರಣದಲ್ಲಿ ಸಾಕಷ್ಟು ಸಂಶಯಗಳು ಮೂಡಿದ ಹಿನ್ನೆಲೆಯಲ್ಲಿ ರಾಮಚಂದ್ರ ಅವರ ಸಹೋದರ ಮಾಲತೇಶ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ.
ಪೊಲೀಸರ ವಿಚಾರಣೆಯ ವೇಳೆ ಆರೋಪಿ ಮಾಲತೇಶ್ ನಡೆದಿದ್ದನ್ನು ಪೊಲೀಸರ ಎದುರು ಬಾಯಿಬಿಟ್ಟಿದ್ದಾನೆ. ತಮ್ಮ ರಾಮಚಂದ್ರ ತನ್ನ ಪತ್ನಿ ಜತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಿರುವುದಾಗಿ ಆರೋಪಿ ಮಾಲತೇಶ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಜೇಡಗೇರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ತೋಟ ಕಾಯಲು ಮಾಲತೇಶ್ ಹಾಗೂ ಅವರ ಹೆಂಡತಿ ನೆಲೆಸಿದ್ದರು. ರಾಮಚಂದ್ರರನ್ನು ತನ್ನ ಮನೆಗೆ ಕರೆಸಿಕೊಂಡಿದ್ದ ಆರೋಪಿ ಆತನನ್ನು ಕೊಲೆ ಮಾಡಿ ಹೂತು ಹಾಕಿದ್ದ. ಇನ್ನೂ ನಿನ್ನೆ ಮಂಗಳವಾರ ಪೊಲೀಸರು ಆಡಳಿತ ವ್ಯವಸ್ಥೆಯ ಸಮಕ್ಷಮದಲ್ಲಿ ಕಳೇಬರ ಹೊರತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.






