ಉಡುಪಿ:ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳತನ, ಆರೋಪಿಗಳ ಬಂಧನ
Views: 34
ಕನ್ನಡ ಕರಾವಳಿ ಸುದ್ದಿ: ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳತನ ಜಾಲದ ಆರೋಪಿಗಳಾದ ಕೇರಳದ ಆಶಿಕ್ ಅನ್ಸಾರ್ (19) ಹಾಗೂ ಮಹಮ್ಮದ್ ಅಲ್ತಫ್ (23) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿ. 28ರಂದು ಉಡುಪಿಯ ಮೂಡನಿಡಂಬೂರಿನ ನಾಗಚಂದ್ರ ಅವರು ಕರಾವಳಿ ಬೈಪಾಸ್ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾದ ಬಗ್ಗೆ ನಗರ ಠಾಣೆಗೆ ದೂರು ನೀಡಿದ್ದರು. ಆರೋಪಿಯ ಪತ್ತೆಗಾಗಿ ಡಿವೈಎಸ್ಪಿ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ ನಗರ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಪಿ. ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ಭರತೇಶ ಕಂಕಣವಾಡಿ, ಗೋಪಾಲಕೃಷ್ಣ ಜೋಗಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು.
ಸಿಬಂದಿಗಳಾದ ಪ್ರಸನ್ನ ಸಿ., ಸಂತೋಷ್ ರಾಥೋಡ್, ಮಲ್ಲಯ್ಯ ಹಿರೇಮಠ, ಶಿವಕುಮಾರ್ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಕೇರಳ ರಾಜ್ಯದ ಮುಕ್ಕಂ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಬಳಿ ಇದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆಶಿಕ್ ಅನ್ಸಾರ್ ವಿರುದ್ಧ ಕೇರಳ ರಾಜ್ಯದಲ್ಲಿ 2 ಪ್ರಕರಣ ದಾಖಲಾಗಿದೆ. ಅದರಲ್ಲಿ 1 ಮನೆ ಕಳ್ಳತನ ಪ್ರಕರಣ, ಇನ್ನೊಂದು ಗಾಂಜಾ ಸೇವನೆ ಪ್ರಕರಣ ದಾಖಲಾಗಿದೆ. ಮಹಮ್ಮದ್ ಅಲ್ತಫ್ ವಿರುದ್ಧ ಕೇರಳ ರಾಜ್ಯದಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 3 ಕಳ್ಳತನ ಪ್ರಕರಣ, 2 ಗಾಂಜಾ ಸೇವನೆ ಪ್ರಕರಣ ದಾಖಲಾಗಿದೆ.






