ದೇವಸ್ಥಾನಕ್ಕೆಂದು ಹೊರಟ ಬಾಲಕನ ಸಾವಿನ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಕಂಡು ಬಂದಿರುವುದೇನು?
Views: 234
ಕನ್ನಡ ಕರಾವಳಿ ಸುದ್ದಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿ ಬಂದಿದ್ದು, ಪೊಲೀಸ್ ಆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಆ ಪ್ರಕಾರ” ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ.

ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ ಬಲವಾದ ಮೂರು ಹೊಡೆತಗಳು ಬಿದ್ದಿವೆ. ಅರೆಪ್ರಜ್ಞಾವಸ್ಥೆಯಲ್ಲಿ ಆತ ಕೆರೆಗೆ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಕಂಡು ಬಂದಿರುವುದಾಗಿ ತಿಳಿದು ಬಂದಿದೆ.
ಇದೊಂದು ಕೊಲೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದ್ದು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.






