ಎಸೆಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಅಗ್ರ ಸ್ಥಾನ ಪಡೆದ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ ಗೌರವ

Views: 1
ಕುಂದಾಪುರ :ಕಳೆದ 25 ವರ್ಷಗಳಿಂದ ಗ್ರಾಮೀಣ ಪ್ರದೇಶದ ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶಂಕರನಾರಾಯಣ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಗುರುತಿಸಿ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಇತ್ತೀಚೆಗೆ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಉಡುಪಿ, ಕೋಟ ವಿದ್ಯಾ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯಸ್ಥರ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ಅವರು ಪ್ರಮಾಣ ಪತ್ರ ಸ್ವೀಕರಿಸಿದರು.
2022- 23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದೆ. ಹೀಗೆ ಪದವಿ ಪೂರ್ವ ಶಿಕ್ಷಣದಲ್ಲಿಯೂ ಸತತ ಉತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳು, ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಮತ್ತು ನಿವೃತ್ತ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಗಣಪತಿ.ಕೆ ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಕೋಟ ವಿದ್ಯಾ ಸಂಘದ ಕಾರ್ಯದರ್ಶಿ ರಾಮದೇವ್ ಐತಾಳ್, ವಿವೇಕ ಪ.ಪೂ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ್ ನಾವಡ ಇನ್ನಿತರರು ಉಪಸ್ಥಿತರಿದ್ದರು.







