ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ,ಇಬ್ಬರು ಮಕ್ಕಳು ಅನಾಥ!
Views: 60
ಕನ್ನಡ ಕರಾವಳಿ ಸುದ್ದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಗೃಹಿಣಿ ನೇಣಿಗೆ ಶರಣಾಗಿದ್ದಾರೆ.
ಗಂಡ ಮತ್ತು ಹೆಂಡತಿ ಮಧ್ಯೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಗಂಡ ಸಂತೋಷ್ ಹಾಗೂ ಮನೆಯವರು ಶ್ರೀನಿಧಿ ಅವರ ಮೇಲೆ ಮಾನಸಿಕ ಒತ್ತಡ ಹೇರುತ್ತಿದ್ದರು. ಅಷ್ಟೇ ಅಲ್ಲದೆ, ಶ್ರೀನಿಧಿ ತನ್ನ ತವರು ಮನೆಯವರೊಂದಿಗೆ ಮಾತನಾಡಬಾರದು ಎಂಬ ಕಾರಣಕ್ಕೆ ಅವರಿಂದ ಮೊಬೈಲ್ ಫೋನ್ ಅನ್ನು ಕಸಿದುಕೊಳ್ಳಲಾಗಿತ್ತು. ಇದರಿಂದ ತೀವ್ರವಾಗಿ ನೊಂದಿದ್ದ ಶ್ರೀನಿಧಿ, ಕೊನೆಗೆ ಜೀವನವೇ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪೋಷಕರು ವರದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ. ಶ್ರೀನಿಧಿಯ ಪತಿ ಸಂತೋಷ್, ಆತನ ತಾಯಿ (ಅತ್ತೆ) ಮತ್ತು ಇನ್ನಿಬ್ಬರು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಪತಿ ಸಂತೋಷ್ನನ್ನು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.






