ಇತರೆ

ಮರವಂತೆ ರಾಷ್ಟ್ರೀಯ ಹೆದ್ದಾರಿ ಬಳಿ ಕಾಲೇಜು ಪ್ರವಾಸಿ ಬಸ್‌, ಟ್ಯಾಂಕರ್ ಢಿಕ್ಕಿ: ಇಬ್ಬರು ಮೃತ್ಯು, ಹಲವರಿಗೆ ಗಾಯ

Views: 193

ಕನ್ನಡ ಕರಾವಳಿ ಸುದ್ದಿ: ಕಾಲೇಜು ಪ್ರವಾಸ ಹೊರಟಿದ್ದ ಬಸ್ಸು ರಸ್ತೆ ಬದಿ ನಿಂತಿದ್ದ ಟ್ಯಾಂಕ‌ರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ಹಂತದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿ ಇದ್ದರು.

ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಇಂದು ಬೆಳಿಗ್ಗೆ ಉಡುಪಿ ಕಡೆ ಬಸ್ಸಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಬದಿ ನಿಲ್ಲಿಸಿದ ಗ್ಯಾಸ್‌ ಟ್ಯಾಂಕರ್‌ಗೆ ಢಿಕ್ಕಿ ಹೊಡೆಯಿತು. ಬಳಿಕ ಅಲ್ಲೇ ಮುಂದೆ ನಿಲ್ಲಿಸಿದ ಗೂಡ್ಸ್ ಲಾರಿಗೂ ಬಸ್ ಢಿಕ್ಕಿ ಹೊಡೆದು ಇದರಿಂದ ಬಸ್ಸಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟರೆಂದು ತಿಳಿದುಬಂದಿದೆ. ಉಳಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು.

ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದ್ದಾರೆ. ಉಡುಪಿ ಎಸ್ಪಿ ಹರಿರಾಂ ಶಂಕ‌ರ್, ಡಿವೈಎಸ್ಪಿ ಕುಲಕರ್ಣಿ, ಗಂಗೊಳ್ಳಿ ಎಸೈ ಪವನ್ ನಾಯಕ್, ಹಾಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!