ತೀವ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಜ್ಯಪಾಲ ದಿಢೀರ್ ಮುಂಬೈಗೆ ಪ್ರಯಾಣ, ಸಿಎಂ ರಾಜೀನಾಮೆ ಹೇಗೆ?
Views: 109
ಕನ್ನಡ ಕರಾವಳಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದೀಗ ನಡುವೆಯೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ ಅವರು ದಿಢೀರ್ ಮುಂಬೈಗೆ ತೆರಳಿದ್ದಾರೆ. ಸಂಬಂಧಿಕರ ಅನಾರೋಗ್ಯದ ಕಾರಣ ನೀಡಿ ರಾಜ್ಯಪಾಲರು ನಿನ್ನೆ ರಾತ್ರಿ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದ್ದಾರೆಂದು ತಿಳಿದುಬಂದಿದೆ. ಇದೀಗ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಲೋಕ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಗೊಂದಲದ ನಡುವೆ ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿದೆ ಎಂದು ಹೇಳಲಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜಭವನದ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್ ಪ್ರವಾಸ ಮುಗಿಸಿ ವಾಪಸ್ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ. ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ ಮಾತುಕತೆ ನಡೆಸಿದ ಬಳಿಕವಷ್ಟೇ ಅದಕ್ಕೆ ಅಧಿಕೃತವಾಗುತ್ತದೆ.
ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಸರ್ಕಾರ ಮುನ್ನಡೆಸಲು ಮತ್ತು ಜನಪದ ಕಾರ್ಯಕ್ರಮಗಳನ್ನು ಜಾರಿಗೆ ತರಲು ತಮಗೆ ಬೆಂಬಲವಾಗಿ ನಿಂತ ಎಲ್ಲಾ ಸಚಿವರಿಗೂ ಹಾಗೂ ಶಾಸಕರಿಗೂ ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಿದರು. ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ನಾಯಕತ್ವ ವಹಿಸಲಿರುವ ಮುಂದಿನ ಹೆಜ್ಜೆಗಳ ಕುರಿತು ಸಭೆಯಲ್ಲಿ ಕೆಲವು ಪ್ರಾಥಮಿಕ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.






