ಆಶ್ರಮ ಶಾಲೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು: ಮೂವರ ಸ್ಥಿತಿ ಗಂಭೀರ
Views: 97
ಕನ್ನಡ ಕರಾವಳಿ ಸುದ್ದಿ: ಆಶ್ರಮ ಶಾಲೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಬುಡಕಟ್ಟು ಸಮುದಾಯದ ಜನರು ಹೆಚ್ಚಾಗಿ ವಾಸವಾಗಿರುವ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನಲ್ಲಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಆಶ್ರಮ ಶಾಲೆಯ 6 ಬಾಲಕಿಯರು ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದು, ಇತರ ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಶ್ರಯ ಶಾಲೆಯ ಇನ್ನೂ 14 ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಧನೋಕಾ ತಾಲೂಕಿನ ಆಶ್ರಮ ಶಾಲೆಯ ಹಾಸ್ಟೆಲ್ನಲ್ಲಿ ಸುಮಾರು 79 ವಿದ್ಯಾರ್ಥಿನಿಯರು ನೆಲದ ಮೇಲೆ ಮಲಗಿದ್ದರು. ಈ ವೇಳೆ ಬೆಳಗಿನ ಜಾವ 2 ಗಂಟೆ ಹೊತ್ತಿನಲ್ಲಿ ಹಾವು ಕಚ್ಚಿದೆ ಎನ್ನಲಾಗಿದೆ. ಗಡ್ಚಿರೋಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನ ದೃಢಪಡಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಇನ್ನು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮೂವರು ಬಾಲಕಿಯರು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನ ಕೇಳಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.






