ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳವು
Views: 81
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕುಂಭಾಶಿ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಗಣೇಶ ಚತುರ್ಥಿ ಪ್ರಯುಕ್ತ ಬಂದಿದ್ದ 75 ವರ್ಷದ ವೃದ್ಧೆಯೊಬ್ಬರ ಕುತ್ತಿಗೆಯಿಂದ ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ನಡೆದಿದೆ.
ಬೈಂದೂರು ತಾಲೂಕಿನ ನಾಡ ಗ್ರಾಮದ ನಿವಾಸಿ ಮುತ್ತು (75) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ
ಸೆ.14ರಂದು ಅವರು ಬೆಳಗ್ಗೆ 10:30 ಗಂಟೆಗೆ ಮುತ್ತು ಕುಟುಂಬಸ್ಥರೊಂದಿಗೆ ಆನೆಗುಡ್ಡೆ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು, ತೀರ್ಥ ಪ್ರಸಾದ ಸ್ವೀಕರಿಸಿ ಪ್ರದಕ್ಷಿಣೆ ಬರುತ್ತಿದ್ದಾಗ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಜನಸಂದಣಿಯ ಲಾಭ ಪಡೆದ ತಮಿಳು ಭಾಷಿಕರಂತೆ ಕಾಣುವ 2 ರಿಂದ 3 ಅಪರಿಚಿತ ಮಹಿಳೆಯರ ತಂಡವು, ಮುತ್ತು ಅವರ ಕುತ್ತಿಗೆಯಲ್ಲಿದ್ದ ಸುಮಾರು 22 ಗ್ರಾಂ ತೂಕದ ಚಿನ್ನದ ಚೈನ್ ಅನ್ನು ಸದ್ದಿಲ್ಲದೆ ಎಳೆದುಕೊಂಡು ಪರಾರಿಯಾಗಿದೆ. ಕಳವಾದ ಚಿನ್ನದ ಸರದ ಒಟ್ಟು ಮೌಲ್ಯ ಸುಮಾರು 2,50,000 ರೂಪಾಯಿ ಎಂದು ಅಂದಾಜಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸರ ಕಳೆದುಕೊಂಡ ಮಹಿಳೆ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೇವಸ್ಥಾನದ ಆವರಣದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತಮಿಳುನಾಡು ಮೂಲದ ಅಂತರಾಜ್ಯ ಕಳ್ಳರ ಗ್ಯಾಂಗ್ ಈ ಕೃತ್ಯ ಎಸಗಿದೆಯೇ ಎಂಬ ನಿಟ್ಟಿನಲ್ಲಿ ತನಿಖೆ ನಡೆಸಿದ್ದಾರೆ.
ಅದೇ ದಿನ ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವಾಗಿದ್ದು, ಮಲ್ಪೆ ಸಮೀಪ ತಂಡವನ್ನು ವಶಕ್ಕೆ ಪಡೆದಿರುವ ಪೊಲೀಸರ ತನಿಖೆಯಿಂದ ವಿವಿಧೆಡೆ ನಡೆದಿರುವ ಚಿನ್ನಾಭರಣ ಕಳವು ಪ್ರಕರಣಗಳೊಂದಿಗೆ ಈ ಪ್ರಕರಣ ಹೊರಬರುವ ಸಾಧ್ಯತೆ ಇದೆ.






