ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್

Views: 0
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿಯವರು ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕುಮಾರಸ್ವಾಮಿ ಅವರಿಗೆ ಲಘು ಮೆದುಳಿನ ಸ್ಟ್ರೋಕ್ಗೆ ಒಳಗಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆ.
ಹೆಚ್ಡಿಕೆ ಡಿಸ್ಚಾರ್ಜ್ ಆದ ಹಿನ್ನೆಲೆಯಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕುಟುಂಬದ ಇತರೆ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದರು. ಡಿಸ್ಚಾರ್ಜ್ ಆದ ಬಳಿಕ ತಮಗೆ ಚಿಕಿತ್ಸೆ ನೀಡಿದ್ದ ವೈದ್ಯರೊಂದಿಗೆ ಹೆಚ್ಡಿಕೆ ಸುದ್ದಿಗೋಷ್ಠಿ ನಡೆಸಿದರು. ಮಾಜಿ ಸಿಎಂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಬಳಿಕ ಹೆಚ್ಡಿಕೆ ಮಾತನಾಡಿ ತಮ್ಮ ಆರೋಗ್ಯ ಕುರಿತು ಮಾಹಿತಿ ಹಂಚಿಕೊಂಡರು.
ಬುಧವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಹೆಚ್ಡಿ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದಲ್ಲಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಎಚ್ಡಿಕೆ ಅವರ ಆರೋಗ್ಯ ಸ್ಥಿತಿಯ ಕುರಿತಾಗಿ ಆಸ್ಪತ್ರೆ ಹೇಲ್ತ್ ಬುಲೆಟಿನ್ ಕೂಡಾ ರಿಲೀಸ್ ಮಾಡಿತ್ತು. ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಕುಮಾರಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದರು. ಇದೀಗ ಹೆಚ್ಡಿಕೆ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.






